ಬೆಂಗಳೂರು,ಫೆ.27 : ಗುರುವಾರ ಬೆಂಗಳೂರಿನ ಹೆಬ್ಬಾಳದ ಕೆಂಪಾಪುರ ಜಂಕ್ಷನ್ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ಪೋರ್ಟ್ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ನಡೆದ ಭೀಕರ ಅಪಘಾತವನ್ನು ಖಂಡಿಸಿ ಹೆಬ್ಬಾಳ ಜಂಕ್ಷನ್ ಬಳಿ ಸಿಂಧಿ ಕಾಲೇಜು, ಪ್ರೆಸಿಡೆನ್ಸಿ ಕಾಲೇಜು ಮತ್ತು ವಿದ್ಯಾನಿಕೇತನ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು,
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ರಸ್ತೆಯಲ್ಲಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಇನ್ನ ಪ್ರತಿಭಟನೆಯಲ್ಲಿ ಕೆಲ ಸ್ಥಳೀಯ ಸಂಘಸಂಸ್ಥೆಗಳು ಪಾಲ್ಗೊಂಡಿದ್ದು, ಕರ್ನಾಟಕ ಹಿತರಕ್ಷಣಾ ವೇದಿಕೆ ಮತ್ತು ಆಮ್ ಆದ್ಮಿ ಪಕ್ಷದ ಕಾರ್ಯಕಕರ್ತರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೆಬ್ಬಾಳ ಜಂಕ್ಷನ್ ನಲ್ಲಿ ಪಾದಾಚಾರಿಗಳು ರಸ್ತೆ ದಾಟಲು ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಇಲ್ಲಿ ಸ್ಕೈವಾಕ್ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇನ್ನು ಪ್ರತಿಭಟನಾ ನಿರತರನ್ನು ನಿಭಾಯಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಇಂದು ಅಂತ್ಯಕ್ರಿಯೆ:
ನಿನ್ನೆ ಕೆಂಪಾಪುರ ಜಂಕ್ಷನ್ ಬಳಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದ ಸಿಂಧಿ ಕಾಲೇಜಿನ ವಿದ್ಯಾರ್ಥಿನಿ ಅರ್ಪಿತಾ ಮತ್ತು ಅನಂದ್ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ವಿದ್ಯಾರ್ಥಿನಿ ಅರ್ಪಿತಾ ಅವರ ಅಂತಿಮ ವಿಧಿವಿಧಾನವನ್ನು ಹೆಬ್ಬಾಳದಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಆನಂದ್ ತಾಯಿ ರತ್ನಮ್ಮ ಅಸ್ವಸ್ಥ:
ಇದೇ ವೇಳೆ ನಿನ್ನೆ ಮೃತಪಟ್ಟಿದ್ದ ಆನಂದ್ ಅವರ ತಾಯಿ ರತ್ನಮ್ಮ ತಮ್ಮ ಮಗನ ಸಾವಿನ ಸುದ್ದಿಕೇಳಿ ಆಘಾತಕ್ಕೊಳಗಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.