ಬ್ರಹ್ಮಾವರ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ತನ್ನ ಪಾರದರ್ಶಕ ಆಡಳಿತದಿಂದ ದೇಶವನ್ನು ಆರ್ಥಿಕ ಸ್ಥಿರತೆ ಯತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ತೆರಿಗೆ ವಂಚನೆಗೆ ಬ್ರೇಕ್, ಕಪ್ಪು ಹಣ ತನಿಖೆ, ನಾಗರಿಕರಿಗೆ ಜನ-ಧನ ಯೋಜನೆ ಜಾರಿಯೊಂದಿಗೆ ಏಕರೂಪ ತೆರಿಗೆ, ಸೇರಿದಂತೆ ಹಲವು ಯೋಜನೆಗಳೊಂದಿಗೆ ದೇಶದಲ್ಲಿ ಆರ್ಥಿಕ ಶಿಸ್ತು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಅವರು ಶುಕ್ರವಾರ ಬ್ರಹ್ಮಾವರ ಮಧುವನ ಕಾಂಪ್ಲೆಕ್ಸ್ನಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಕಚೇರಿ ಜಗಜೀವನದಾಸ್ ಶೆಟ್ಟಿ ಭವನ ಉದ್ಘಾಟಿಸಿ, ಬಿಜೆಪಿ ಹಿಂದುಳಿದ ಮೋರ್ಚಾ ಸಹಯೋಗದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಈ ಹಿಂದಿನ ಕೇಂದ್ರ ಕಾಂಗ್ರೆಸ್ ಆಡಳಿತದಲ್ಲಿ ಆರ್ಥಿಕ ಸ್ಥಿರತೆ, ಶಿಸ್ತು ಇರಲಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಮೋದಿ ಸರಕಾರ ಬಂದ ಬಳಿಕ ದೇಶದಲ್ಲಿ ಪಾರದರ್ಶಕ ಆಡಳಿತದಿಂದಾಗಿ ಆರ್ಥಿಕ ಸ್ಥಿರತೆ ಮೂಡಿದೆ. ಕಪ್ಪು ಹಣ ತರಲು ವಿಶೇಷ ತನಿಖಾ ತಂಡ ರಚಿಸಲಾಗಿದೆ. ಭ್ರಷ್ಟಾಚಾರ ನಿವಾರಿಸಲು ದೇಶದಲ್ಲಿ ಸಮಾನ ತೆರಿಗೆ ವ್ಯವಸ್ಥೆ ಮಾಡಲಾಗುವುದು. ಭಾರತದಲ್ಲಿ ಬಂಡವಾಳ ಹೂಡಲು ವಿದೇಶಿಯರು ಮುಂದೆ ಬರಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ದಿಕ್ಸೂಚಿ ಭಾಷಣಗೈದರು. ಮಾಜಿ ಶಾಸಕ ಕೆ. ರಘುಪತಿ ಭಟ್ ಪ್ರಸ್ತಾವನೆಗೈದರು. ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕರ್ಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್, ವಿಧಾನ ಪರಿಷತ್ ಸದಸ್ಯರಾದ ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಉದಯ ಕುಮಾರ್ ಶೆಟ್ಟಿ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ರಂಜಿತ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.