ಊರ, ಪರವೂರ್ದ ಮಾತೆರ್ಲ ವಿಶ್ವ ತುಳುವೆರೆ ಪರ್ಬೊಗು ಬರೊಡ್ : ಧರ್ಮಸ್ಥಳದ ಧರ್ಮಧರ್ಶಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಂದ ಆತ್ಮೀಯ ಹಾಗೂ ಪ್ರೀತಿ ಪೂರ್ವಕ ಆಮಂತ್ರಣ
ಮಂಗಳೂರು,ಡಿ.೦6: ಅಡ್ಯಾರ್ ಬಳಿಯ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಡಿ.12, 13, 14ರಂದು ನಡೆಯುವ ವಿಶ್ವ ತುಳುವೆರೆ ಪರ್ಬದಲ್ಲಿ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಸಹಿತ, ಕಂಬಳ ನಿಷೇಧ ಹಾಗೂ ನೇತ್ರಾವತಿ ತಿರುವು ಕುರಿತು ಚರ್ಚೆ ನಡೆಯಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನರ ಮಾತೃಭಾಷೆ ಭಿನ್ನವಾಗಿದ್ದರೂ ವ್ಯವಹಾರ ಭಾಷೆ ತುಳುವಾಗಿರುವ ಕಾರಣ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
12ರಂದು ಉದ್ಘಾಟನೆ: ಎಸ್.ಯು.ಪಣಿಯಾಡಿ ಸಭಾಂಗಣದ ಎಸ್.ಆರ್.ಹೆಗ್ಡೆ ವೇದಿಕೆಯಲ್ಲಿ ಡಿ.12ರಂದು ಸಂಜೆ 5 ಗಂಟೆಗೆ ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಉದ್ಘಾಟನೆ ನೆರವೇರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ತಿರುಪತಿ ಶ್ರೀವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ರಮಣ ದೀಕ್ಷಿತ್ ಶುಭಾಶಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಲಿ, ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಾಜಿ ಸಚಿವ ಬಿ.ಎ.ಮೊದಿನ್, ಬಿಲ್ಡರ್ ಡಾ.ಪಿ.ದಯಾನಂದ ಪೈ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.
ಡಿ.14ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಯಾಗಿ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಸಂಸದ ನಳಿನ್ ಕುಮಾರ್ ಕಟೀಲ್, ಸಂಸದೆ ಶೋಭಾ ಕರಂದ್ಲಾಜೆ, ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮುಂಬಯಿ ಬಂಟರ ಸಂಘ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ತೋನ್ಸೆ ಜಯಕೃಷ್ಣ ಶೆಟ್ಟಿ, ರಾಯ್ ಕ್ಯಾಸ್ಟಲಿನೋ, ಬಿ.ಎ.ಮೊಹಮ್ಮದ್ ಹನೀಫ್, ಕರುಣಾಕರ ಶೆಟ್ಟಿ ಉಪಸ್ಥಿತರಿರುವರು.
ಡಿ.13, 14ರಂದು ಶ್ರೀಭೂತನಾಥೇಶ್ವರ ಕ್ರೀಡಾಕೂಟ, ಸಾಂಸ್ಕೃತಿಕ ವೈವಿಧ್ಯ, ತುಳುನಾಡಿನ ವಸ್ತು ಹಾಗೂ ಛಾಯಾಚಿತ್ರ ಪ್ರದರ್ಶನವಿದ್ದು, ಸಾಹಿತ್ಯ, ಸಂಸ್ಕೃತಿ, ಮನೋರಂಜನೆ ಪ್ರಾಕೃತಿಕ ಪರಿಸರದಲ್ಲಿ ಮೂರು ದಿನಗಳ ಕಾಲ ನಡೆಯಲಿದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರಕಾರದಿಂದ 50 ಲಕ್ಷ ರೂ. ಅನುದಾನದ ನಿರೀಕ್ಷೆಯಿದೆ ಹಾಗೂ ಜಾನಪದ ಕ್ರೀಡೆ ಕಂಬಳ ಉಳಿಸಲು ಪ್ರಯತ್ನಿಸಲಾಗುವುದು ಎಂದರು.
ಅಖಿಲ ಭಾರತ ತುಳು ಒಕ್ಕೂಟದ ಬೆಳ್ಳಿ ಹಬ್ಬ ಹಿನ್ನೆಲೆಯಲ್ಲಿ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಸಮ್ಮೇಳನ ನಡೆಯಲಿದೆ. ತುಳು ಪರ್ಬ ಸಮಿತಿಯ ಪದಾಧಿಕಾರಿಗಳಾದ ದಾಮೋದರ ನಿಸರ್ಗ, ಪ್ರದೀಪ್ ಕುಮಾರ್ ಕಲ್ಕೂರ, ಪ್ರೊ.ಎಂ.ಬಿ.ಪುರಾಣಿಕ್, ಅಡ್ಯಾರ್ ಮಹಾಬಲ ಶೆಟ್ಟಿ, ಎ.ಸಿ.ಭಂಡಾರಿ, ಕದ್ರಿ ನವನೀತ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.