ಮಂಗಳೂರು: ಮಂಗಳೂರಿನ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಿಪ್ಪು ಜಯಂತಿ ಆಚರಿಸುತ್ತಿದ್ದ ವೇಳೆ, ಟಿಪ್ಪು ಜಯಂತಿ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸೇರಿದಂತೆ ಸಂಘಪರಿವಾರದ ನೂರಾರು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲೆತ್ನಿಸಿದ್ದ ಘಟನೆ ಮಂಗಳವಾರ ನದೆದಿದೆ.
ಜಿಲ್ಲಾ ಪಂಚಾಯತ್ ಕಛೇರಿಯ ನೇತ್ರಾವತಿ ಸಭಾಂಗಣದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಬಾಯಿಗೆ ಕಪ್ಪು ಬಟ್ಟೆ ಕಟ್ಟಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸೇರಿದಂತೆ ಸಂಘಪರಿವಾರದ ನೂರಕ್ಕೂ ಹೆಚ್ಚು ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಟಿಪ್ಪು ವಿರೋಧಿ ಘೋಷಣೆಗಳನ್ನು ಕೂಗುತ್ತಾ ಕಾರ್ಯಕ್ರಮಕ್ಕೆ ಆಚರಣೆಗೆ ವಿರೋಧ ವ್ಯಕ್ತಪಡಿಸಿದರು. ಮಾತ್ರವಲ್ಲದೇ ಟಿಪ್ಪು ವಿರೋಧಿ ಘೋಷಣೆಗಳನ್ನು ಕೂಗುತ್ತಾ, ರಾಜ್ಯ ಸರಕಾರದ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದರು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುವ ಬಗ್ಗೆ ಜಿಲ್ಲಾಡಳಿತಕ್ಕೆ ಮೊದಲೇ ಮಾಹಿತಿಯಿದ್ದುದರಿಂದ ಕಾರ್ಯಕ್ರಮ ನಡೆವ ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಕಪ್ಪು ಪಟ್ಟಿ ಬಿಗಿದು, ಕಪ್ಪು ಬಾವುಟ ಪ್ರದರ್ಶಿಸಿ ಜಯಂತಿ ವಿರೋಧಿಸಿ ಘೋಷಣೆ ಕೂಗುತ್ತಿದ್ದಂತೆಯೇ ಪೊಲೀಸರು ಸಂಘಪರಿವಾರದ ಮುಖಂಡರಾದ ಶರಣ್ ಪಂಪುವೆಲ್, ಜಗದೀಶ್ ಶೇಣವ, ಜಿತೇಂದ್ರ ಕೊಟ್ಟಾರಿ ಸೇರಿದಂತೆ ೧೦೦ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಕೆಲ ಹೊತ್ತಿನ ಬಳಿಕ ಎಲ್ಲರನ್ನೂ ಬಿಡುಗಡೆಗೊಳಿಸಿದರು.