ಮ೦ಗಳೂರು ಡಿ.09: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ, ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
ಅವರು ಬುಧವಾರ ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್ಗೆ ರೂ. 1510 ಹಾಗೂ ಗ್ರೇಡ್ ಎ ಭತ್ತವನ್ನು ರೂ. ಕ್ವಿಂಟಾಲ್ಗೆ ರೂ. 1550ರಂತೆ ಖರೀದಿಸಲಾಗುವುದು. ಭಾರತ ಸರಕಾರವು ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ಕರ್ನಾಟಕ ಸರಕಾರವು ಕ್ವಿಂಟಾಲ್ಗೆ ರೂ. 100 ಸಹಾಯಧನ ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಭತ್ತ ಖರೀದಿಸಿದ ಬಳಿಕ ರೈತರಿಗೆ ವಿಳಂಭವಿಲ್ಲದೆ, ಒಂದು ವಾರದೊಳಗೆ ಅವರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಜಿಲ್ಲೆಯ ಭತ್ತ ಬೆಳೆಗಾರರು ಈ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದು ಎ.ಬಿ. ಇಬ್ರಾಹಿಂ ತಿಳಿಸಿದರು. ಭತ್ತ ಖರೀದಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕ ಡಾ.ಎಂ. ದಾಸೇಗೌಡ, , ಜಂಟೀ ಕೃಷಿ ನಿರ್ದೇಶಕ ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.