ಪುತ್ತೂರು, ಡಿ.10 : ಒಂಟಿಯಾಗಿ ವಾಸವಿದ್ದ ವೃದ್ಧೆಯೋರ್ವರು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಬಟ್ಟೆಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಿಂದ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಸಂಭವಿಸಿದೆ.
ತೆಕ್ಕಾರು ಗ್ರಾಮದ ಮರಮ ಮನೆ ನಿವಾಸಿ ಆಚು (75) ಮೃತ ಮಹಿಳೆಯಾಗಿದ್ದು, ಒಬ್ಬಂಟಿಯಾಗಿ ವಾಸವಾಗಿದ್ದರು. ಮೊನ್ನೆ ಸಂಜೆ ಅಡುಗೆ ಮಾಡುತ್ತಿದ್ದ ಸಂದರ್ಭ ಒಲೆಯ ಬೆಂಕಿ ಅವರು ಧರಿಸಿದ್ದ ಬಟ್ಟೆಗೆ ತಗುಲಿ ತೀವ್ರ ಸುಟ್ಟ ಗಾಯಗಳಾಗಿದ್ದವು.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿಯ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮೃತರ ಸೋದರಿಯ ಪುತ್ರ ಕೃಷ್ಣಪ್ಪ ಮೂಲ್ಯರ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.