ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಜಿಎಸ್ ಟಿ ಮಸೂದೆಗೆ ಬೆಂಬಲ ನೀಡುವಂತೆ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆ ಮನವಿ ಮಾಡಿದ್ದಾರೆ.
ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಈ ಹಿಂದೆ ತಾನೇ ಮಸೂದೆಯಲ್ಲಿ ಪ್ರಸ್ತಾಪಿಸಿದ್ದ ಕೆಲವು ಅಂಶಗಳನ್ನು ವಿರೋಧಿಸುತ್ತಿದೆ. ಜಿಎಸ್ ಟಿ ಮಸೂದೆ ಎಲ್ಲಾ ಪಕ್ಷಗಳ ಸಾಮೂಹಿಕ ಜಾಣ್ಮೆಯ ಪ್ರತಿಫಲ. ಆದರೆ ಬಡವರ ಪರವಾಗಿದ್ದೇವೆ ಎಂದು ತೋರಿಸಿಕೊಳ್ಳಲು ಮಸೂದೆಯನ್ನು ವಿರೋಧಿಸುತ್ತಿರುವವರು ವಾಸ್ತವವಾಗಿ ಬಡತನವನ್ನು ಶಾಶ್ವತವಾಗಿರಿಸುವುದಕ್ಕೆ ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಸಂಸತ್ ನಲ್ಲಿ ಮಸೂದೆ ಜಾರಿಗೆ ಕಾಂಗ್ರೆಸ್ ಅಡ್ಡಿಪಡಿಸುತ್ತಿರುವ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸಭೆ ನಡೆಸಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ಅಡ್ಡಿ ಪಡಿಸುವುದು ಮುಂದುವರೆದರೆ, ಕಾಂಗ್ರೆಸ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.