ಹಾವೇರಿ,ಡಿ.31-ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಘರ್ಷಣೆಯಲ್ಲಿ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಪೊಲೀಸರು 10 ಜನರನ್ನು ಬಂಧಿಸಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಸುಳಿಸರ ಗ್ರಾಮದಲ್ಲಿ ನಡೆದಿದೆ.
ಒಂದು ಗುಂಪು ಪ್ರಾರ್ಥನಾ ಮಂದಿರದ ಮುಂದೆ ಮೆರವಣಿಗೆ ಹೊರಟಾಗ, ಇನ್ನೊಂದು ಗುಂಪು ಆಕ್ಷೇಪಿಸಿ ಧ್ವನಿವರ್ದಕ ಶಬ್ದವನ್ನು ಕಡಿಮೆ ಮಾಡುವಂತೆ ತಿಳಿಸಿದಾಗ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಇನಂದು ಗುಂಪು ರಾತ್ರಿವೇಳೆ ಪೊಲೀಸ್ ವಾಹನದ ಮೇಲೆ ಹಾಗೂ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.
ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಇಡೀ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು. ನಾಗರಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಶಾಂತಿ ಕಾಪಾಡಿಕೊಂಡು ಹೋಗಬೇಕು. ಶಾಂತಿಗೆ ಭಂಗ ತಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ನಿಷೇಧಾಜ್ಞೆ ಜಾರಿ: ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.