ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಉಡುಗೊರೆ ನೀಡಿದ ಪ್ರಕರಣ ಇದೀಗ ಹೈಕೋರ್ಟ್ ಅಂಗಳ ತಲುಪಿದೆ. ಮುಖ್ಯಮಂತ್ರಿಗಳಿಗೆ ಹ್ಯೂಬ್ಲೋಟ್ ವಾಚ್ ಉಡುಗೊರೆ ನೀಡಿದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಆದೇಶಿಸುವಂತೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಮಂಗಳವಾರ ಈ ಅರ್ಜಿ ನ್ಯಾ. ಅರವಿಂದ ಕುಮಾರ್ ಹಾಗೂ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ಈ ಅರ್ಜಿಯ ತುರ್ತು ವಿಚಾರಣೆ ಅಗತ್ಯವಿಲ್ಲ. ಸಾಮಾನ್ಯ ಪೀಠದಲ್ಲಿ ವಿಚಾರಣೆಗೆ ಬರಲಿ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ದುಬಾರಿ ಮೌಲ್ಯದ ಈ ವಾಚ್ಅನ್ನು ಕಿಕ್ಬ್ಯಾಕ್ ರೂಪದಲ್ಲಿ ಉಡುಗೊರೆ ಪಡೆಯಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿವಂತೆ ದಾಖಲೆಗಳ ಸಮೇತ ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿಗಳು ಸಾರ್ವಜನಿಕ ಜೀವನದಲ್ಲಿದ್ದು, ಇಂತಹ ವೇಳೆ ಭಾರೀ ಮೌಲ್ಯದ ಉಡುಗೊರೆ ಪಡೆದಿರುವುದರಿಂದ ಈ ಸಂಬಂಧ ಸಿಬಿಐ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪ್ರಧಾನ ಮಂತ್ರಿ ಕಾರ್ಯಾಲಯ, ಸಿಬಿಐ, ರಾಜ್ಯಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಆರೋಗ್ಯ ಇಲಾಖೆ, ಮುಖ್ಯಮಂತ್ರಿಗಳಿಗೆ ವಾಚ್ ಉಡುಗೊರೆ ನೀಡಿದ್ದಾರೆ ಎನ್ನಲಾದ ಡಾ.ಗಿರೀಶ್ಚಂದ್ರ ವರ್ಮಾ ಮತ್ತಿತರರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
Comments are closed.