ಚೆನ್ನೈ: ಕೇರಳ, ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಅ. 7ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆ ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಎರಡು ತಿಂಗಳ ಹಿಂದೆ ಕೇರಳ ಅತ್ಯಂತ ಭೀಕರವಾದ ಪ್ರವಾಹಕ್ಕೆ ಸಿಕ್ಕಿ ನಲುಗಿಹೋಗಿತ್ತು. ಅಲ್ಲಿಯ ಜನರು ಇನ್ನೂ ಆ ಆಘಾತದಿಂದ ಚೇತರಿಸಿಕೊಂಡಿಲ್ಲ. ಆಸ್ತಿ, ಮನೆ, ಕುಟುಂಬಕ್ಕೆ ಆಧಾರವಾಗಿದ್ದ ಕೆಲ ಜೀವಗಳನ್ನೂ ಕಳೆದುಕೊಂಡ ‘ದೇವರನಾಡಿನ’ ಜನರಿಗೆ ವಿಶ್ವಾದ್ಯಂತ ಹಲವಾರು ಜನ ಸಹಾಯಹಸ್ತ ಚಾಚಿದ್ದರು. ಆದರೆ, ಅದೇ ಕೇರಳಕ್ಕೀಗ ಮತ್ತೊಮ್ಮೆ ಮಳೆಯ ಹೊಡೆತದ ಅಪಾಯ ಎದುರಾಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಈ ಭಾನುವಾರ ತಮಿಳುನಾಡು, ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಕೇರಳ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಶನಿವಾರದಿಂದ ಸೋಮವಾರದವರೆಗೆ ಸಮುದ್ರದ ಕಡೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿದ ಪ್ರವಾಹದಿಂದ ಆಸ್ತಿ-ಪಾಸ್ತಿ ಹಾನಿಯಾಗಿ 25 ಸಾವಿರ ಕೋಟಿಗೂ ಹೆಚ್ಚು ನಷ್ಟವುಂಟಾಗಿತ್ತು. ಅದರಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೆ ಭಾರೀ ಮಳೆಯಾಗುವ ಸಂಭಾವ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಟ್ವೀಟ್ ಮಾಡಿದ್ದು, ಅ. 7ರಂದು 24 ಗಂಟೆಗಳಲ್ಲಿ 12ರಿಂದ 20 ಸೆ. ಮೀ. ಮಳೆಯಾಗುವ ಸಾಧ್ಯತೆಯಿದೆ. ಕೇರಳದ ಒಂದೆರಡು ಜಿಲ್ಲೆಗಳಲ್ಲಿ ಈ ರೀತಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾವು ಅದಕ್ಕೆ ಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇರಳದ ಇಡುಕ್ಕಿ, ಪಲಕ್ಕಾಡ್, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎದ್ದಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳ ಮೇಲೂ ಅದರ ಪರಿಣಾಮವಾಗುತ್ತಿದೆ. ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾಡಳಿತದ ಕಚೇರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಿಗೆ ಹೋಗದಂತೆ, ಆದಷ್ಟು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಜನರಿಗೆ ಸೂಚನೆ ನೀಡಲಾಗಿದೆ. ಮೀನುಗಾರರಿಗೂ ಸಮುದ್ರದಲ್ಲಿ ಹೋಗದಂತೆ ಎಚ್ಚರಿಕೆ ನೀಡಿದ್ದೇವೆ ಎಂದು ತಮಿಳುನಾಡು ಆಯುಕ್ತ ಕೆ. ಸತ್ಯಗೋಪಾಲ್ ತಿಳಿಸಿದ್ದಾರೆ.
Comments are closed.