ಕರಾವಳಿ

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಗೊಂದಲ : ಸ್ಮಾರ್ಟ್ ಸಿಟಿ ಸಲಹಾ ಸಮಿತಿ ರಚನೆಗೆ ಸಂಸದ ನಳಿನ್‌ ಕುಮಾರ್ ಆಗ್ರಹ

Pinterest LinkedIn Tumblr

ಮಂಗಳೂರು : ಮಂಗಳೂರು ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಸಂಪೂರ್ಣ ಗೊಂದಲಮಯವಾಗಿದೆ. ಯೋಜನೆಯ ಕೋಟ್ಯಾಂತರ ರೂ.ದುರುಪಯೋಗವಾಗುತ್ತಿದೆ . ರಾಜ್ಯ ಸರ್ಕಾರ ತಕ್ಷಣ ಸ್ಮಾರ್ಟ್ ಸಿಟಿ ಯೋಜನೆಗೆ ಪೂರ್ಣ ಪ್ರಮಾಣದ ಎಂಡಿ ಹಾಗೂ ಸಲಹಾ ಸಮಿತಿ ರಚಿಸಬೇಕೆಂದು ಸಂಸದ ನಳಿನ್‌ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ನಗರದ ಸಮಗ್ರ ಅಭಿವೃದ್ದಿ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಿದೆ. ಆದರೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಈ ಉದ್ದೇಶವನ್ನೇ ಮರೆತ ಹಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆಯಡಿ 15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿದ್ದಾರೆ.ನಿಗದಿತ ದರಕ್ಕಿಂತ ಹೆಚ್ಚಿನ ದರ ನಮೂದಿಸಿ ಕಾಮಗಾರಿ ಗುತ್ತಿಗೆ ನೀಡಲಾಗುತ್ತಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಯಾವುದೇ ಕಾಮಗಾರಿ ಪೂರ್ಣವಾಗಿಲ್ಲ. ಹಣ ದುರುಪಯೋಗವಾಗುವ ಸಾಧ್ಯತೆ ಇದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಿದ್ದೇನೆ ಎಂದು ಆಡಳಿತ ಪಕ್ಷದ ಜನಪ್ರತಿನಿಧಿಗಳೇ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಈ ಬಗ್ಗೆ ತುರ್ತು ಸಭೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಸಂಸದರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Comments are closed.