ಬೆಂಗಳೂರು: ರಾಜ್ಯ ಶಿಕ್ಷಣ ಸಚಿವ ಎನ್. ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಮ್ಮಿಶ್ರ ಸರ್ಕಾರದ ಮೊದಲ ಸಚಿವರ ವಿಕೆಟ್ ಪತನವಾಗಿದೆ.
ಜೆಡಿಎಸ್ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಹುಜನ ಸಮಾಜವಾದಿ ಪಕ್ಷ, ಗೆದ್ದ ಅಭ್ಯರ್ಥಿ ಎನ್. ಮಹೇಶ್ರಿಗೆ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಜತೆ ಕೈಗೂಡಿಸುವಂತೆ ತಿಳಿಸಿತ್ತು. ಆದರೆ ಕಳೆದ ಕೆಲ ದಿನಗಳಿಂದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗುತ್ತಲೇ ಬಂದಿತ್ತು.
ಕಾಂಗ್ರೆಸ್ನ ರಾಷ್ಟ್ರೀಯ ನಾಯಕ ದಿಗ್ವಿಜಯ್ ಸಿಂಗ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಏಜೆಂಟ್ ಎಂಬುದಾಗಿ ಮಾಯಾವತಿ ಗಂಭೀರ ಆರೋಪ ಮಾಡಿದ್ದರು. ಅದರ ಬೆನ್ನಲ್ಲೇ ಮಹಾಘಟ್ ಬಂಧನದಿಂದ ಮಾಯಾವತಿ ಹಿಂದೆ ಸರಿಯುವ ನಿರ್ಧಾರ ಮಾಡಿದ್ದರು. ಜತೆಗೆ ಎಲ್ಲಾ ಮಿತ್ರ ಪಕ್ಷಗಳಿಗೂ ಕಾಂಗ್ರೆಸ್ ಪಕ್ಷವನ್ನು ದೇಶಾದ್ಯಂತ ಬುಡಸಮೇತ ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದರು.
ಮಾಯಾವತಿ ಹೇಳಿಕೆಯ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಎನ್ ಮಹೇಶ್ ಕಾಂಗ್ರೆಸ್ ಪಕ್ಷದ ವಿರುದ್ಧ ಛಾಟಿ ಬೀಸಿದ್ದರು. ಅದಾಗಿ ವಾರ ಕಳೆಯುವ ಮೊದಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಎಸ್ಪಿ ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಮೈತ್ರಿಯನ್ನು ಕಡಿದುಕೊಂಡಿದೆ.
ಎನ್ಡಿಎ ಮೈತ್ರಿಕೂಟವನ್ನು ಹೊರತುಪಡಿಸಿ ಎಲ್ಲಾ ಪ್ರಾದೇಶಿಕ ಮತ್ತು ಕಾಂಗ್ರೆಸ್ ಪಕ್ಷ ಒಂದಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲ ಪಣ ತೊಟ್ಟಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಮತ್ತು ಮಾಯಾವತಿಯವರ ಬಹುಜನ ಸಮಾಜವಾದಿ ಪಕ್ಷದ ನಡುವೆ ಭಿನ್ನಮತ ಆರಂಭವಾಗಿತ್ತು. ಈ ಬಗ್ಗೆ ಮಾಯಾವತಿಯವರು ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದ್ದರು. ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡರೆ ಉಳಿಗಾಲವಿಲ್ಲ ಎಂದು ಮಾಯಾವತಿ ಹೇಳಿದ್ದರು.
ಮಹಾ ಮೈತ್ರಿಯ ಬಗ್ಗೆ ಬಿಜೆಪಿ ಮುಖಂಡ ಮತ್ತು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೋಮವಾರ ಮಾತನಾಡಿ, ಮಹಾ ಮೈತ್ರಿ ವಿಫಲವಾಗಿ ಯಾವುದೋ ಕಾಲವಾಗಿದೆ ಎಂದಿದ್ದರು. ಮಹಾ ಮೈತ್ರಿ ಹಲವು ಬಾರಿ ಪರೀಕ್ಷೆಗೆ ಒಳಪಟ್ಟಿದ್ದು, ಇದೊಂದು ವಿಫಲ ಯತ್ನ ಎಂದು ಮೂದಲಿಸಿದ್ದರು. ಆ ಮಾತು ಸತ್ಯವಾಗುವಂತೆ ಈಗ ಕರ್ನಾಟಕ ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿದ್ದ ಬಿಎಸ್ಪಿ ಶಾಸಕ ಎನ್ ಮಹೇಶ್ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡಿದ ನಂತರ ಮಾತನಾಡಿದ ಎನ್ ಮಹೇಶ್, ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಜತೆಗೆ ಎನ್ ಮಹೇಶ್ ಸಮ್ಮಿಶ್ರ ಸರ್ಕಾರದ ಬಗ್ಗೆ ತಮಗ್ಯಾವುದೇ ಬೇಸರವಿಲ್ಲ ಎಂದಿದ್ದಾರೆ. “ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬುದು ಸುಳ್ಳು. ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಶಿಕ್ಷಣ ಇಲಾಖೆಯಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಈ ಸ್ಥಾನಕ್ಕೆ ಯಾರು ಬರುತ್ತಾರೋ ಅವರೂ ಒಳ್ಳೆಯ ಕೆಲಸವನ್ನು ಮುಂದುವರೆಸಲಿ ಎಂದು ಆಶಿಸುತ್ತೇನೆ,” ಎಂದರು.
ರಾಜೀನಾಮೆ ನೀಡುವ ಮುನ್ನ ಎನ್ ಮಹೇಶ್ ಬಿಎಸ್ಪಿಯ ರಾಷ್ಟ್ರೀಯ ನಾಯಕರ ಜತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಖುದ್ದು ಮುಖ್ಯಸ್ಥೆ ಮಾಯಾವತಿ ಸೂಚನೆ ಮೇರೆಗೆ ಮಹೇಶ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
Comments are closed.