ಬೆಂಗಳೂರು (ಮಾರ್ಚ್ 10); ಮಧ್ಯಪ್ರದೇಶದ ರಾಜ್ಯ ರಾಜಕಾರಣದಲ್ಲಿ ಸೋಮವಾರ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉರುಳುವುದು ಬಹುತೇಕ ಖಚಿತವಾಗಿದೆ. ರಾಜ್ಯ ಸರ್ಕಾರ ಬೀಳಿಸಲು ಮುಂದಾಗಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಶಾಸಕರನ್ನು ಕರ್ನಾಟಕದ ರೆಸಾರ್ಟ್ನಲ್ಲಿಟ್ಟಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಈ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿರುವ ಡಿ.ಕೆ. ಶಿವಕುಮಾರ್, “ಇದು ಪಕ್ಷದ ಆಂತರಿಕ ವಿಚಾರ. ಇದರಲ್ಲಿ ಬಿಜೆಪಿ ನಾಯಕರು ತಲೆಹಾಕುವ ಅಥವಾ ನಮ್ಮ ಶಾಸಕರಿಗೆ ರಕ್ಷಣೆ ನೀಡುವ ಅಗತ್ಯವಿಲ್ಲ. ನಮ್ಮ ಶಾಸಕರನ್ನು ನಾವು ನೋಡಿಕೊಳ್ಳುತ್ತೇವೆ. ಇನ್ನೂ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಶೀಘ್ರದಲ್ಲೇ ನಮ್ಮ ಅಸಮಾಧಾನಿತ ಶಾಸಕರನ್ನು ಸಂಪರ್ಕಿಸಿ ಮಾತನಾಡಿಸಲಾಗುವುದು ಮತ್ತು ಅವರ ಮನವೊಲಿಸಿ ಮತ್ತೆ ಪಕ್ಷಕ್ಕೆ ಕರೆತರಲಾಗುವುದು” ಎಂದು ತಿಳಿಸಿದ್ದಾರೆ.
ಈ ಹಿಂದೆ ಗುಜರಾತ್ನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹಮದ್ ಪಟೇಲ್ ಸೋಲಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿತ್ತು. ಆದರೆ, ಅಲ್ಲಿನ ಕಾಂಗ್ರೆಸ್ ಶಾಸಕರನ್ನು ಕರ್ನಾಟಕದ ರೆಸಾರ್ಟ್ನಲ್ಲಿ ಭದ್ರವಾಗಿಡುವ ಮೂಲಕ ಡಿಕೆಶಿ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣೆದಿದ್ದ ಡಿಕೆಶಿ ಗೆಲುವು ಸಾಧಿಸಿದ್ದರು. ಹೀಗಾಗಿ ಮಧ್ಯಪ್ರದೇಶದ ಜವಾಬ್ದಾರಿಯನ್ನೂ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿದೆ ಎನ್ನಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಒಂದು ಬಣ ಧೃವೀಕರಣವಾಗಿದ್ದು ಈಗಾಗಲೇ 16 ಜನ ಶಾಸಕರು ಹಾಗೂ 22 ಜನ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಪೈಕಿ ಒಂದಷ್ಟು ಶಾಸಕರ ತಂಡ ಕಮಲ ನಾಯಕರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಆಶ್ರಯಪಡೆದಿದ್ದಾರೆ ಎನ್ನಲಾಗುತ್ತಿದೆ.
Comments are closed.