ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ರಾಮಯ್ಯ ಆಗಿರುವ ಕಾರಣ ಬೆಂಗಳೂರಿನಲ್ಲಿ ದಿವಂಗತೆ ಇಂದಿರಾಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ದಿವಂಗತೆ ಇಂದಿರಾಗಾಂಧಿ ಎನ್ನುವ ಬದಲು ದಿವಂಗತೆ ಸೋನಿಯಾಗಾಂಧಿ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷವನ್ನೇ ದಿವಂಗತ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ಬ್ರಹ್ಮಾವರ ತಾಲೂಕು ರಚನೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಬ್ರಹ್ಮಾವರದ ತಾಲೂಕು ಪಂಚಾಯತ್ ಬಳಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳಿಗೆ ರಾಜ್ಯದ ಬಗ್ಗೆ ಕಾಳಜಿಯೇ ಇಲ್ಲವಾಗಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ.
ಜಗದೀಶ್ ಶೆಟ್ಟರ್ ಕಾಲದಲ್ಲಿ ರಚನೆಯಾಗಿದ್ದ 44ತಾಲೂಕುಗಳನ್ನು ರದ್ದು ಮಾಡಲು ಹೊರಟಿದೆ. ಆದ್ದರಿಂದ ಬ್ರಹ್ಮಾವರ ಮರು ತಾಲೂಕಾಗಿ ರಚನೆ ಮಾಡಬೇಕು ಎಂದು ಆಗ್ರಹಿಸಿದರು.
ನೈತಿಕ ಪೋಲಿಸ್ ಗಿರಿ ವಿರೋಧಿಸಿ ಕಿಸ್ಸಿಂಗ್ ಡೇ ಪ್ರತಿಭಟನೆಗೆ ಮುಖ್ಯಮಂತ್ರಿಗಳು ಕಾನೂನು ವ್ಯಾಪ್ತಿಯಲ್ಲಿದ್ದರೆ ಅಡ್ಡಿಯಿಲ್ಲ ಎಂದಿದ್ದು ಕಿಸ್ಸಿಂಗ್ ಡೇ ಯಾವ ಕಾನೂನು ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಬೇಕು ಎಂದು ಪ್ರಶ್ನಿಸಿದರು.
ಸಂಸದೆ ಶೋಭಾ ಕರಂದ್ಲಾಜೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಾಜಿ ಶಾಸಕ ಕೆ.ರಘುಪತಿ ಭಟ್, ಯಶ್ ಪಾಲ್ ಸುವರ್ಣ, ಗೀತಾಂಜಲಿ ಸುವರ್ಣ, ಶ್ಯಾಮಲಾ ಕುಂದರ್ ಮತ್ತಿತರರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು. ವರದಿ:ಪರೀಕ್ಷಿತ್ ಶೇಟ್