ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಶನಿವಾರ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿ ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ, ಸಾಹಿತಿ ಪ್ರೊ. ಚಂದ್ರಶೇಖರ ಕಂಬಾರ, ರಾಜ್ಯದ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್
ನವದೆಹಲಿ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಮಾತೃಭಾಷೆ ಶಿಕ್ಷಣ ಕೊಡಲು ಅವಕಾಶವಾಗುವಂತೆ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಶನಿವಾರ ಮನವಿ ಮಾಡಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ ಅವರ ಸಮ್ಮುಖದಲ್ಲಿ ಪ್ರಣವ್ ಮುಖರ್ಜಿ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಾಹಿತಿ ಪ್ರೊ. ಚಂದ್ರಶೇಖರ ಕಂಬಾರ, ರಾಜ್ಯದ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಪಂಜಾಬಿನ ಖ್ಯಾತ ಭಾಷಾ ತಜ್ಞ ಜೋಗಾಸಿಂಗ್, ರಾಜಸ್ತಾನದ ಸಾಹಿತಿ ಹಾಗೂ ನಾಟಕಕಾರರಾದ ಭಾನುಭಾರತಿ ಅವರಿದ್ದರು.
ಕರ್ನಾಟಕ ಒಂದರಿಂದ ಐದನೇ ತರಗತಿವರೆಗೆ ಮಕ್ಕಳಿಗೆ ಮಾತೃಭಾಷೆಯಲ್ಲೇ ಶಿಕ್ಷಣ ಕೊಡುವ ನಿರ್ಧಾರ ಮಾಡಿದೆ. ಆದರೆ, ಸುಪ್ರೀಂ ಕೋರ್ಟ್ ಶಿಕ್ಷಣ ಮಾಧ್ಯಮ ಆಯ್ಕೆ ಅಧಿಕಾರವನ್ನು ಪೋಷಕರಿಗೆ ನೀಡಿರುವುದರಿಂದ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆಯಾಗಿದೆ. ಇದರಿಂದ ಪ್ರಾದೇಶಿಕ ಭಾಷೆಗಳಿಗೆ ಅಪಾಯ ಎದುರಾಗಿದ್ದು, ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರುವ ಮೂಲಕ ರಾಜ್ಯ ಭಾಷೆಗಳನ್ನು ಉಳಿಸಬೇಕು ಎಂದು ನಿಯೋಗ ರಾಷ್ಟ್ರಪತಿಗೆ ಮನವಿ ಮಾಡಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಣವ್ ಮುಖರ್ಜಿ, ಸಮಗ್ರ ಶಿಕ್ಷಣ ನೀತಿಗೆ ಆಗ್ರಹಿಸುವ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು ಎಂದು ಹನುಮಂತಯ್ಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.