ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನನ್ನ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜಕೀಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನನ್ನು ಮಣಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸಿಬಿಐ ಅಧಿಕಾರಿಗಳಿಂದ ದಾಳಿ ಮಾಡಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇದು ಮೋದಿ ಅವರ ಹೇಡಿತನ ಕೃತ್ಯ. ಮೋದಿ ಓರ್ವ ಸೈಕೋಪಾತ್ ಎಂದು ಟ್ವೀಟಿಸಿದ್ದಾರೆ.
ಲಂಚ ಸ್ವೀಕಾರದ ಆರೋಪದ ಮೇಲೆ ಡಿಸೆಂಬರ್ 10 ರಂದು ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದು, ಇದರ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. 2 ಗಂಟೆಗಳಿಗೂ ಹೆಚ್ಚು ಕಾಲ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು ನಂತರ ಕಚೇರಿಗೆ ಬೀಗ ಜಡಿದಿದ್ದಾರೆ ಎನ್ನಲಾಗಿದೆ.
ಭ್ರಷ್ಟಾಚಾರ ನಿರ್ಮೂಲನೆ ಹೆಸರಲ್ಲಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಹೇರಿದ್ದ ಕೇಜ್ರಿವಾಲ್ ಕಚೇರಿ ಮೇಲೆ ಸಿಬಿಐ ದಾಳಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.
ಕೇಜ್ರಿವಾಲ್ ಕಚೇರಿ ಮೇಲೆ ದಾಳಿ ಮಾಡಿಲ್ಲ: ಸಿಬಿಐ
ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದು, ಸಿಎಂ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಾಳಿ ಮಾಡಿಲ್ಲ ಎಂದು ಸಿಬಿಐ ಸ್ಫಷ್ಟಪಡಿಸಿದೆ. ರಾಜೇಂದ್ರ ಕುಮಾರ್ ಅವರ ಕಚೇರಿ ಮುಖ್ಯಮಂತ್ರಿಗಳ ಕಚೇರಿಗೆ ಹೊಂದಿಕೊಂಡಂತೆ ಇದೆ ಎಂದು ಹೇಳಿದ್ದಾರೆ.