ಚೆನ್ನೈ: ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮತ್ತೆ ಪ್ರಧಾನ ಕಾರ್ಯದರ್ಶಿಯಾಗಿ ಗುರುವಾರ ಮರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಜಯಲಲಿತಾ ಅವರನ್ನು ಸತತ 7 ನೇ ಬಾರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. 2016ರಲ್ಲಿ ವಿಧಾನಸಭಾ ಚುನಾವಣೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಜಯಲಲಿತಾ ಅವರು ಈಗಾಗಲೇ ಪಕ್ಷದ ಸದಸ್ಯರನ್ನು ಸಭೆಗೆ ಕರೆದಿದ್ದು, ತಿರುಮನ್ಮೂಯೂರ್ ನಲ್ಲಿ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಸಭೆ ವೇಳೆ ಜಯಲಲಿತಾ ಅವರು 14 ನಿರ್ಣಯಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಚೆನ್ನೈ ಪ್ರವಾಹದಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿದ್ದಾರೆಂದು ತಿಳಿದುಬಂದಿದೆ.
ಇದಲ್ಲದೆ, ಭಾರತೀಯ ಮೀನುಗಾರರ ಮೇಲೆ ದೌರ್ಜನ್ಯವೆಸಗುತ್ತಿರುವ ಶ್ರೀಲಂಕಾದೊಂದಿಗೆ ಮಾತುಕತೆ ನಡೆಸುವಂತೆ ಹಾಗೂ ವಿವಾದಿತ ಜಲ್ಲಿಕಟ್ಟು ನಿಷೇಧವನ್ನು ತೆರವುಗೊಳಿಸುವಂತೆ ಕೇಂದ್ರ ಬಳಿ ಮನವಿ ಮಾಡುವುದರ ಕುರಿತಂತೆ ಮಾತುಕತೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.