ನವದೆಹಲಿ, ಜ.5-ಆರು ಜನ ಯೋಧರನ್ನು ಬಲಿ ಪಡೆದ ಪಠಾಣ್ಕೋಟ್ ವಾಯುನೆಲೆ ಮೇಲಿನ ದಾಳಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇಂದು ನವದೆಹಲಿಯಲ್ಲಿ ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಆನಂದ ಶರ್ಮಾ ಅವರು, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕೆಲಸ ಕೇವಲ ಸಲಹೆ ನೀಡುವುದಷ್ಟೇ ಹೊರತು ಮಾತುಕತೆ ನಡೆಸುವುದಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ಥಾನಕ್ಕೆ ದಿಢೀರ್ ಭೇಟಿ ನೀಡಿದ ಪ್ರಸಂಗಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಆನಂದ್ ಶರ್ಮಾ ಅವರು, ಪಾಕಿಸ್ಥಾನದ ಪ್ರಧಾನಿ ನವಾಜ್ ಷರೀಫ್ ಅವರ ಜೊತೆ ಮೋದಿ ಅವರು ಮಾತುಕತೆ ನಡೆಸಿದ್ದಾದರೂ ಏಕೆ ಎಂದಿದ್ದಾರೆ.
ಪ್ರಧಾನಿ ಮೋದಿ ಅವರು ಕೇಂದ್ರ ಎನ್ಡಿಎ ಸರ್ಕಾರದ ವಿದೇಶಾಂಗ ನೀತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಪ್ರಧಾನಿ ಅವರು ಯಾವ ಆಧಾರದ ಮೇಲೆ ಪಾಕಿಸ್ಥಾನಕ್ಕೆ ತೆರಳಿ ಅವರ ಸಹವರ್ತಿ ಶರೀಫ್ ಜೊತೆ ವೈಯಕ್ತಿಕವಾಗಿ ಮಾತುಕತೆ ನಡೆಸಿದರು ಎಂಬುದನ್ನು ಅವರು ಈ ದೇಶದ ಜನತೆ ಎದುರು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.