ಇಸ್ಲಾಮಾಬಾದ್: ಪಠಾಣ್ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕಡೆಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ 12 ಸದಸ್ಯರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಗಾಗಿ ಭಾರತಕ್ಕೆ ತನಿಖಾಧಿಕಾರಿಗಳನ್ನು ಕಳುಹಿಸುವ ಸಾಧ್ಯತೆ ಇದೆ.
ಜನವರಿ 2ರಂದು ಪಠಾಣ್ಕೋಟ್ ವಾಯುನೆಲೆ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಉಗ್ರ ಸಂಘಟನೆ ವಿರುದ್ಧ ಕ್ರಮ ತೆಗೆದುಕೊಂಡಿರುವ ಪಾಕ್, ಉಗ್ರ ಸಂಘಟನೆಯ ಕಚೇರಿಗಳನ್ನು ಸಹ ಬುಧವಾರ ಸೀಲ್ ಮಾಡಿದೆ.
ಪಠಾಣ್ಕೋಟ್ ದಾಳಿಯ ಹಿಂದೆ ಜೈಶ್-ಇ-ಮೊಹಮ್ಮದ್ ಸಂಘಟನೆಯ ಕೈವಾಡ ಇದೆ ಎಂದು ಆರೋಪಿಸಿದ್ದ ಭಾರತ, ಈ ಸಂಬಂಧ ಪಾಕಿಸ್ತಾನಕ್ಕೆ ಕೆಲವು ಸಾಕ್ಷ್ಯಗಳನ್ನು ಸಹ ನೀಡಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಪಾಕ್ ತನಿಖಾಧಿಕಾರಿಗಳು ಭಾರತಕ್ಕೆ ಆಗಮಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು, ಪಾಕಿಸ್ತಾನಕ್ಕೆ ದಿಢೀರ್ ಭೇಟಿ ಪ್ರಧಾನಿ ನವಾಜ್ ಷರೀಫ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಬಳಿಕ ಜನವರಿ 15ಕ್ಕೆ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿತ್ತು. ಆದರೆ ಪಠಾಣ್ ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕೈಗೊಳ್ಳುವ ಕ್ರಮದ ಮೇಲೆ ಭಾರತ ಮತ್ತು ಪಾಕ್ ನಡುವಿನ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಬಗ್ಗೆ ನಿರ್ಧಾರವಾಗಲಿದೆ ಎಂದು ಭಾರತ ಖಡಕ್ ಸಂದೇಶ ರವಾನಿಸಿತ್ತು.