ಕರಾವಳಿ

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಮೂಲಕ ಕ್ರಮ : ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್

Pinterest LinkedIn Tumblr

ಮಂಗಳೂರು: : ನಗರದ ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಕೋನ್‌ಗಳ ಮೇಲೆ ಚಲಿಸಿದ 2 ಖಾಸಗಿ ಹಾಗೂ 3 ಕೆಎಸ್ಸಾರ್‌ಟಿಸಿ ಬಸ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಸಿಸಿ ಕ್ಯಾಮರಾ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ನಗರದ ವಿವಿಧ ಕಡೆಗಳಲ್ಲಿ ಸುಗಮ ಸಂಚಾರಕ್ಕಾಗಿ ಅಳವಡಿಸಿರುವ ಟ್ರಾಫಿಕ್ ಕೋನ್‌ಗಳಿಗೆ ಹಾನಿ ಮಾಡುವ ವಾಹನಗಳನ್ನು ವಶಪಡಿಸಿಕೊಂಡು ಅವುಗಳ ಚಾಲಕರ ವಿರುದ್ಧ ಕಾನೂನು ಕ್ರಮ ದಾಖಲಿಸಲಾಗುತ್ತಿದೆ. ಮಾತ್ರವಲ್ಲದೇ ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗ್ರಾಮಸಭೆಗಳು ನಡೆಯುವಾಗ ವಿವಿಧ ಇಲಾಖಾಧಿಕಾರಿಗಳು ಆಗಮಿಸಿ ತಮ್ಮ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ಒದಗಿಸಬೇಕು. ತೊಕ್ಕೊಟ್ಟುವಿನಲ್ಲಿ ವಾಹನ ದಟ್ಟಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಹಸನಬ್ಬ ಅಮ್ಮೆಂಬಳ ಒತ್ತಾಯಿಸಿದರು.

ನಗರದ ವಿವಿಧ ಕಡೆ ಬಸ್ ಬೇ ನಿರ್ಮಿಸಲಾಗಿದೆ. ಆದರೆ ಬಸ್‌ನವರು ನಡುರಸ್ತೆಯಲ್ಲೇ ನಿಲ್ಲಿಸುತ್ತಿದ್ದಾರೆ. ಇದರಿಂದ ವಾಹನ ದಟ್ಟಣೆ ಉಂಟಾಗುತ್ತದೆ. ಕೆಪಿಟಿ ವೃತ್ತದ ಬಳಿ ಖಾಸಗಿ ಬಸ್‌ನವರು ನಿರಂತರ ಪಾರ್ಕಿಂಗ್ ಮಾಡುತ್ತಾರೆ ಎಂದು ಮೇರಿಹಿಲ್‌ನ ಸಾರ್ವಜನಿಕರೊಬ್ಬರು ದೂರಿದರು.

ನಗರದಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಪಾವತಿ ಪಾರ್ಕಿಂಗ್ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೊಟ್ಟಾರ ಚೌಕಿಯ ಸಾರ್ವಜನಿಕರೊಬ್ಬರು ಒತ್ತಾಯಿಸಿದರು. ಈಗಾಗಲೇ ಪಾರ್ಕಿಂಗ್ ಜಾಗಗಳನ್ನು ಗುರುತಿಸಿ, ಪಾಲಿಕೆ ಆಯುಕ್ತರಿಗೆ ನೀಡಲಾಗಿದೆ. ಸಭೆಯಲ್ಲಿ ಅನುಮೋದನೆಗೊಂಡ ಬಳಿಕ ಜಾರಿಗೊಳಿಸಲು ಸಾಧ್ಯ ಎಂದು ಆಯುಕ್ತರು ಪ್ರತಿಕ್ರಿಯಿಸಿದರು.

ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಅಧಿಕ ಮಕ್ಕಳನ್ನು ಸಾಗಾಟ ಮಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸುವಂತೆ ಮುಲ್ಕಿಯ ಮಹಿಳೆಯೊಬ್ಬರು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಆಯುಕ್ತರು ಶಾಲಾ ವಾಹನಗಳನ್ನು ಪರಿಶೀಲಿಸುವಂತೆ ಇನ್‌ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಸಿಪಿ ಹನುಮಂತರಾಯ, ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ, ಶಿವಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Comments are closed.