ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದ ಅಪೇಕ್ಷೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ವಿಷನ್ ಗ್ರೂಪ್ಗಿಂತ ಸುಧಾರಿತ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆ.
ಬಿಎಂಆರ್ಡಿಎ ಕಚೇರಿಯಲ್ಲಿ ಸೋಮವಾರ ಸಾಯಂಕಾಲ ನಡೆದ ಮಹತ್ವದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದು, ಬಿಬಿಎಂಪಿ ಚುನಾವಣೆಗೆ ಮುನ್ನ ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ನೀಡಿದ ಭರವಸೆಯನ್ನು ಜಾರಿಗೆ ತರುವುದಕ್ಕೆ ಈಗ ಸಿದ್ಧತೆ ಆರಂಭವಾಗಿದೆ.ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಕೃಷಿ ಸಚಿವ
ಕೃಷ್ಣ ಭೈರೇಗೌಡ, ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ನಾರಾಯಣಮೂರ್ತಿ, ರಮೇಶ್ ರಾಮನಾಥನ್ ಸೇರಿದಂತೆ ನಗರ ಯೋಜನೆ, ಅಭಿವೃದ್ಧಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಸಂಬಂಧಪಟ್ಟ ತಜ್ಞರು ಹಾಗೂ
ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು ಸುದೀರ್ಘ ಚರ್ಚೆ ನಡೆಸಲಾಯಿತು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಕಾಲದಲ್ಲಿ ಅಜೆಂಡಾ ಟಾಸ್ಕ್ ಫೋರ್ಸ್ ವ್ಯವಸ್ಥೆಯಲ್ಲಿತ್ತು. ಅದೇ ಮಾದರಿಯಲ್ಲಿ ಸರ್ಕಾರ ವಿಷನ್ ಗ್ರೂಪ್ ಜಾರಿಗೆ ತರುವುದಕ್ಕೆ ಚಿಂತನೆ ನಡೆಸಿದ್ದರೂ ಅದಕ್ಕೆ ನ್ಯಾಯಾಲಯದಲ್ಲಿ ತಡೆ ಸಿಕ್ಕಿತ್ತು. ಈಗ ತಡೆಯಾಜ್ಞೆ ವಜಾಗೊಂಡಿರುವ ಹಿನ್ನೆಲೆಯಲ್ಲಿ ವಿಷನ್ ಗ್ರೂಪ್ಗೂ ಸುಧಾರಿತವಾದ ಮಾದರಿಯನ್ನು ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಸರ್ಕಾರ ನೀಡಿದ ಹಲವಾರು ಭರವಸೆಗಳ ಜಾರಿಗೆ ಈ ಸಂದರ್ಭದಲ್ಲಿ ಚರ್ಚೆಯಾಗಿದೆ. ಶ್ಯೂರಿಟಿ ರಸ್ತೆಗಳ ಬಗ್ಗೆಯೂ ಚರ್ಚೆಯಾಗಿದೆ.