ಪಾಂಡವಪುರ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸುಮಾರು 70 ಸಾವಿರ ರೂ. ಮೌಲ್ಯದ ಹುಲ್ಲಿನ ಮೆದೆ ಬೆಂಕಿಗಾಹುತಿಯಾಗಿರುವ ಘಟನೆ ಪಟ್ಟಣದ ಬೀರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ನಿವಾಸಿ ಜಯರಾಮು ಎಂಬುವರಿಗೆ ಸೇರಿದ ಹುಲ್ಲಿನ ಮೆದೆ ನಾಶವಾಗಿದೆ. ಪಟ್ಟಣದ ಬೀರಶೆಟ್ಟಹಳ್ಳಿ ಬಳಿ ಇರುವ ಕೆಎಸ್ಆರ್ಟಿಸಿ ಬಸ್ ಡಿಪೋದ ಮುಂಭಾಗವಿರುವ ತಮ್ಮ ತೋಟದಲ್ಲಿ ಜಯರಾಮು ಅವರು ಹುಲ್ಲಿನ ಮೆದೆಯನ್ನು ಶೇಖರಿಸಿಟ್ಟಿದ್ದರು. ಶುಕ್ರವಾರ ಮಧ್ಯಾಹ್ನ 2.45ರ ಸಮಯದಲ್ಲಿ ಈ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದೆ ಎನ್ನಲಾಗಿದೆ.
ಕೂಡಲೇ ಗ್ರಾಮದ ಯುವಕರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟರಲ್ಲಿ ಸಂಪೂರ್ಣ ಹುಲ್ಲಿನ ಮೆದೆ ಬೆಂಕಿಗಾಹುತಿಯಾಗಿತ್ತು. ಈ ಘಟನೆಯಿಂದಾಗಿ 70 ಸಾವಿರ ರೂಪಾಯಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.