ಕರ್ನಾಟಕ

ರಾಜ್ಯದ ಹೆಚ್ಚಿನ ಭಾಗ ಬರಗಾಲದ ಹಿನ್ನೆಲೆ ಕುಡಿವ ನೀರು, ಮೇವಿಗೆ ತೊಂದರೆಯಾಗದಂತೆ ಕ್ರಮ ವಹಿಸಿ: ದೇಶಪಾಂಡೆ

Pinterest LinkedIn Tumblr


ಬೆಂಗಳೂರು: ರಾಜ್ಯದ ಹೆಚ್ಚಿನ ಭಾಗದಲ್ಲಿ ಬರಗಾಲವಿರುವ ಹಿನ್ನೆಲೆಯಲ್ಲಿ ಎಲ್ಲೂ ಸಹ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಆಯಾ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟು ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೋ ಸಂವಾದ ನಡೆಸಿದ ಅವರು, ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ಹಣಕಾಸಿನ ಕೊರತೆ ಇಲ್ಲ. ಬರಪೀಡಿತವೆಂದು ಈಗಾಗಲೇ ಘೋಷಿಸಿರುವ 86 ತಾಲ್ಲೂಕುಗಳಿಗೂ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬರಪೀಡಿತ ತಾಲೂಕುಗಳಲ್ಲಿ ದನಕರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಲು ಕೂಡ ಪಶುಸಂಗೋಪನಾ ಇಲಾಖೆಗೆ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳು ಗೋಶಾಲೆಯನ್ನು ತೆರೆಯಲು ಅವಕಾಶವಿದೆ ಎಂದು ಸಚಿವರು ವಿವರಿಸಿದರು.

ಕುಡಿಯುವ ನೀರಿನ ಕೊರತೆ ಇರುವೆಡೆ ಟ್ಯಾಂಕರ್ ಮೂಲಕ, ಇಲ್ಲವೇ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಂಡು ನೀರನ್ನು ಪೂರೈಸಬೇಕು. ಇದಕ್ಕಾಗಿ, ಖಾಸಗಿ ಕೊಳವೆಬಾವಿಗಳ ಮಾಲೀಕರಿಗೆ ಹಣ ಪಾವತಿಸಲಾಗುವುದು. ಸದ್ಯಕ್ಕೆ ರಾಜ್ಯದ 13 ಜಿಲ್ಲೆಗಳ 352 ಹಳ್ಳಿಗಳಿಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ ಎಂದು ದೇಶಪಾಂಡೆ ನುಡಿದರು.

ಮಿಕ್ಕಂತೆ, ಎಲ್ಲ ಜಿಲ್ಲಾಧಿಕಾರಿಗಳೂ ಬೆಳೆ ನಷ್ಟ ಕುರಿತು ತಮ್ಮ ಅಂತಿಮ ವರದಿಯನ್ನು ಇನ್ನು ಒಂದು ವಾರದಲ್ಲಿ ಸಲ್ಲಿಸಬೇಕು. ಈ ವರದಿ ಬಂದಕೂಡಲೇ ಈ ಸಂಬಂಧ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿ, ಪರಿಹಾರ ಕೋರಲಾಗುವುದು ಎಂದು ಸಚಿವರು ಹೇಳಿದರು.

ಕೇಂದ್ರದಿಂದಲೂ ನೆರವು
ರಾಜ್ಯದಲ್ಲಿ ಈ ವರ್ಷ ಮಳೆಯ ಆರ್ಭಟಕ್ಕೆ ಸಿಲುಕಿ 188 ಮಂದಿ ಅಸುನೀಗಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಈ ಜೀವಹಾನಿ ಪ್ರಕರಣಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು (ಒಟ್ಟು 3.85 ಕೋಟಿ ರೂ.) ಬಿಡುಗಡೆ ಮಾಡಲಾಗಿದೆ. ಕಳೆದ ತಿಂಗಳು ಪ್ರಧಾನಮಂತ್ರಿ ಮೋದಿಯವರನ್ನು ರಾಜ್ಯ ನಿಯೋಗದ ಭೇಟಿ ಮಾಡಿದ ಸಂದರ್ಭದಲ್ಲಿ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು ಎಂದು ದೇಶಪಾಂಡೆ ಇದೇ ಸಂದರ್ಭದಲ್ಲಿ ತಿಳಿಸಿದರು.

ಮಳೆಯಿಂದಾಗಿ ಜೀವಹಾನಿ ಆದ 188 ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಎಸ್.ಡಿ.ಆರ್.ಎಫ್.ನಡಿ ತಲಾ 4 ಲಕ್ಷ ರೂ. ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಡಿ ತಲಾ 1 ಲಕ್ಷ ರೂ. (ಒಟ್ಟು 5 ಲಕ್ಷ ರೂ.) ಪರಿಹಾರ ವಿತರಿಸಿದೆ. ಈಗ ಕೇಂದ್ರ ಸರಕಾರವು ಕೂಡ ತಲಾ 2 ಲಕ್ಷ ಕೊಡುತ್ತಿರುವುದರಿಂದ ಈ ಪರಿಹಾರ ಮೊತ್ತ ತಲಾ 7 ಲಕ್ಷ ರೂ. ಆದಂತಾಗಿದೆ ಎಂದು ಕಂದಾಯ ಸಚಿವರು ವಿವರಿಸಿದರು.

Comments are closed.