ಕರ್ನಾಟಕ

ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟು; ಅಖಾಡಕ್ಕೆ ಎಂಟ್ರಿಕೊಟ್ಟ ಡಿಕೆಶಿ

Pinterest LinkedIn Tumblr


ಬೆಂಗಳೂರು (ಮಾರ್ಚ್​ 10); ಮಧ್ಯಪ್ರದೇಶದ ರಾಜ್ಯ ರಾಜಕಾರಣದಲ್ಲಿ ಸೋಮವಾರ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಕಮಲ್​ನಾಥ್ ನೇತೃತ್ವದ ಕಾಂಗ್ರೆಸ್​ ಸರ್ಕಾರ ಉರುಳುವುದು ಬಹುತೇಕ ಖಚಿತವಾಗಿದೆ. ರಾಜ್ಯ ಸರ್ಕಾರ ಬೀಳಿಸಲು ಮುಂದಾಗಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ​ ಶಾಸಕರನ್ನು ಕರ್ನಾಟಕದ ರೆಸಾರ್ಟ್​ನಲ್ಲಿಟ್ಟಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಟ್ರಬಲ್ ಶೂಟರ್​ ಡಿ.ಕೆ. ಶಿವಕುಮಾರ್​ ಅಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ, ಮಧ್ಯಪ್ರದೇಶದ ಕಾಂಗ್ರೆಸ್​ ಸರ್ಕಾರವನ್ನು ಉಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿರುವ ಡಿ.ಕೆ. ಶಿವಕುಮಾರ್​, “ಇದು ಪಕ್ಷದ ಆಂತರಿಕ ವಿಚಾರ. ಇದರಲ್ಲಿ ಬಿಜೆಪಿ ನಾಯಕರು ತಲೆಹಾಕುವ ಅಥವಾ ನಮ್ಮ ಶಾಸಕರಿಗೆ ರಕ್ಷಣೆ ನೀಡುವ ಅಗತ್ಯವಿಲ್ಲ. ನಮ್ಮ ಶಾಸಕರನ್ನು ನಾವು ನೋಡಿಕೊಳ್ಳುತ್ತೇವೆ. ಇನ್ನೂ ಮಧ್ಯಪ್ರದೇಶದ ಕಾಂಗ್ರೆಸ್​ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಶೀಘ್ರದಲ್ಲೇ ನಮ್ಮ ಅಸಮಾಧಾನಿತ ಶಾಸಕರನ್ನು ಸಂಪರ್ಕಿಸಿ ಮಾತನಾಡಿಸಲಾಗುವುದು ಮತ್ತು ಅವರ ಮನವೊಲಿಸಿ ಮತ್ತೆ ಪಕ್ಷಕ್ಕೆ ಕರೆತರಲಾಗುವುದು” ಎಂದು ತಿಳಿಸಿದ್ದಾರೆ.

ಈ ಹಿಂದೆ ಗುಜರಾತ್​ನಲ್ಲಿ ವಿಧಾನ ಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹಮದ್ ಪಟೇಲ್ ಸೋಲಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿತ್ತು. ಆದರೆ, ಅಲ್ಲಿನ ಕಾಂಗ್ರೆಸ್​ ಶಾಸಕರನ್ನು ಕರ್ನಾಟಕದ ರೆಸಾರ್ಟ್​ನಲ್ಲಿ ಭದ್ರವಾಗಿಡುವ ಮೂಲಕ ಡಿಕೆಶಿ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣೆದಿದ್ದ ಡಿಕೆಶಿ ಗೆಲುವು ಸಾಧಿಸಿದ್ದರು. ಹೀಗಾಗಿ ಮಧ್ಯಪ್ರದೇಶದ ಜವಾಬ್ದಾರಿಯನ್ನೂ ಕಾಂಗ್ರೆಸ್​ ಹೈಕಮಾಂಡ್​ ಡಿ.ಕೆ. ಶಿವಕುಮಾರ್​ ಅವರಿಗೆ ನೀಡಿದೆ ಎನ್ನಲಾಗುತ್ತಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಒಂದು ಬಣ ಧೃವೀಕರಣವಾಗಿದ್ದು ಈಗಾಗಲೇ 16 ಜನ ಶಾಸಕರು ಹಾಗೂ 22 ಜನ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಪೈಕಿ ಒಂದಷ್ಟು ಶಾಸಕರ ತಂಡ ಕಮಲ ನಾಯಕರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಆಶ್ರಯಪಡೆದಿದ್ದಾರೆ ಎನ್ನಲಾಗುತ್ತಿದೆ.

Comments are closed.