ಕರಾವಳಿ

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ (ಕೊಚ್ಚಿಗೆ) ಪೂರೈಕೆಗೆ ಮುಖ್ಯಮಂತ್ರಿಗಳಿಂದ ಸಮ್ಮತಿ

Pinterest LinkedIn Tumblr

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗುರುವಾರ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳು ಪ್ರಸ್ತಾವನೆಗೆ ಸಮ್ಮತಿಸಿ, ಪ್ರಸ್ತಾವನೆಯಂತೆ ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಗುಣಮಟ್ಟದ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿ ಅಡಿ ಕುಚಲಕ್ಕಿಯನ್ನು ವಿತರಿಸಲು ಅಗತ್ಯವಿರುವ 299. 33 ಕೋಟಿಗಳಷ್ಟು ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಯವರು ಒಪ್ಪಿದ್ದು, ಈ ಯೋಜನೆ ಅನುಷ್ಠಾನದಿಂದ 6,21,804 ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಅನುಕೂಲವಾಗಲಿದೆ.

ಪ್ರಸ್ತುತ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಅಕ್ಕಿಯ ಪ್ರಮಾಣದಲ್ಲಿ ಶೇ. 50% ರಷ್ಟು ಕುಚಲಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಈ ಅಕ್ಕಿಯ ಪ್ರಮಾಣವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡಲಾಗುತ್ತಿದೆ. ಅದರೆ ಈ ಕುಚಲಕ್ಕಿಯಲ್ಲಿ ರುಚಿಯ ಪ್ರಮಾಣ ಕಡಿಮೆ ಇದ್ದು ಇದರ ಆಹಾರವನ್ನು ಸೇವಿಸಲಾಗುವುದಿಲ್ಲ ಈ ಹಿನ್ನೆಲೆಯಲ್ಲಿ ಕುಚಲಕ್ಕಿಯನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡದೇ ಸ್ಥಳಿಯವಾಗಿ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿಸಿ ಅದರಿಂದ ಕುಚಲಕ್ಕಿಯನ್ನಾಗಿ ಪರಿವರ್ತಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿದಾರರಿಗೆ ವಿತರಿಸಿದರೆ, ಅದನ್ನು ಒಳ್ಳೆಯ ಆಹಾರವನ್ನಾಗಿ ಉಪಯೋಗಿಸ ಬಹುದು ಹಾಗೂ ಇದರಿಂದ ಸ್ಥಳೀಯ ರೈತರಿಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಯವರಿಗೆ ವಿವರಿಸಲಾಯಿತು.

ಈಗಾಗಲೆ ಕೇರಳ ರಾಜ್ಯ ಇದನ್ನು ಅಳವಡಿಕೊಂಡಿದ್ದು ಇದನ್ನು ರಾಜ್ಯದ ಐವರು ಸದಸ್ಯರ ತಂಡ ನಿಯೋಗದಲ್ಲಿ ತೆರಳಿ ಖುದ್ದು ಭೇಟಿಯಾಗಿ ವರದಿಯನ್ನು ನೀಡಿದೆ.
ಪ್ರಸ್ತುತ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಕುಚಲಕ್ಕಿಯನ್ನು ಉಪಯೋಗಿಸುತ್ತಿದ್ದು. ಸದರಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕೇರಳ ರಾಜ್ಯದ ಮಾದರಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಿ ಪರಿವರ್ತಿತ ಕುಚಲಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಿದರೆ ಆ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವ ಬಗ್ಗೆ ಮುಖ್ಯ ಮಂತ್ರಿಗಳಿಗೆ ವಿವರಿಸಲಾಯಿತು. ಮನವಿಯನ್ನು ಆಲಿಸಿದ ಮುಖ್ಯಮಂತ್ರಿಯವರು ಪ್ರಸ್ತಾವನೆಗೆ ಸಮ್ಮತಿ ಸೂಚಿಸಿ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿಯವರು ಉಪಸ್ಥಿತರಿದ್ದರು.

Comments are closed.